MOBILE NETWORK ಮೊಬೈಲ್ ನೆಟ್‌ವರ್ಕ್ ಸೇವೆ ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಿ: ಗುರುದತ್ತ ಹೆಗಡೆ

ಗುರುದತ್ತ ಹೆಗಡೆ

ಶಿವಮೊಗ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಮೊಬೈಲ್ ನೆಟ್‌ವರ್ಕ್ ಸೇವೆ ಲಭ್ಯವಾಗದಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಯುವಕರಿಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಮೊಬೈಲ್ ನೆಟ್‌ವರ್ಕ್ ದೊರಕಿಸಿಕೊಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಿವಿಧ ಮೊಬೈಲ್ ಕಂಪನಿಗಳ ನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಮಲೆನಾಡು ಪ್ರದೇಶ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ಗುರುತಿಸಲಾದ ಅನೇಕ ಸ್ಥಳಗಳಲ್ಲಿ ಬಿಎಸ್ಎನ್ಎಲ್ ಸ್ಥಾವರಗಳನ್ನು ನಿರ್ಮಿಸಿ ಸೇವೆ ಒದಗಿಸುತ್ತಿದೆ. ಆದರೆ, ಬಿಎಸ್ಎನ್ಎಲ್ ನ ಸೇವೆ ನಿರೀಕ್ಷಿಸದಷ್ಟು ಪ್ರಮಾಣದಲ್ಲಿ ಜನರಿಗೆ ದೊರಕದಿರುವುದರಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಸ್ಥಳಗಳಲ್ಲಿ ಏರ್‌ಟೆಲ್, ಜಿಯೋ ಸೇರಿದಂತೆ ಬೇರೆ-ಬೇರೆ ಮೊಬೈಲ್ ಕಂಪನಿಗಳ ನಿರ್ವಾಹಕರೂ ಕೂಡ ತಮ್ಮ ಸೇವೆಯನ್ನು ಜನನಿಬಿಡ ಸ್ಥಳಗಳಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿಯೂ ಉಭಯ ಕಂಪನಿಗಳ ನಡುವೆ ಒಡಂಬಡಿಕೆ ಮಾಡಿಕೊಂಡು ತಮ್ಮ ಸೇವಾ ವಲಯವನ್ನು ವಿಸ್ತರಿಸಿಕೊಳ್ಳುವಂತೆ ಸೂಚಿಸಿದರು.



ಅನ್ಯ ಕಂಪನಿಗಳ ಮುಖ್ಯಸ್ಥರು ತಾವು ಮೊಬೈಲ್ ಸೇವೆ ಒದಗಿಸುವ ಸ್ಥಾವರಗಳನ್ನು ನಿರ್ಮಿಸುವ ಮುನ್ನ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದಲ್ಲಿ ಜಿಲ್ಲಾಡಳಿತದಿಂದ ತಮಗೆ ಅಗತ್ಯವಿರುವ ಭೂಮಿ, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದ  ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗುವುದು.ಅಂತೆಯೇ ಸಮಸ್ಯೆಗಳಿಗೆ ತಕ್ಷಣದ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದರು.
ಸಣ್ಣಪುಟ್ಟ ನ್ಯೂನತೆಗಳ ನಡುವೆಯೂ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ವಿವಿದ ಕಂಪನಿಗಳ ನೆಟ್‌ವರ್ಕ್ ಸೇವೆ ಒದಗಿಸಲಾಗುತ್ತಿದೆ. ಅಂತೆಯೇ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಸೇವೆ ಒದಗಿಸುವ ಬಗ್ಗೆ ಇರುವ ಸಾಧ್ಯತೆಗಳ ಬಗ್ಗೆಯೂ ಪರಿಶೀಲಿಸುವಂತೆ ಮೊಬೈಲ್ ನೆಟ್‌ವರ್ಕ್ ನಿರ್ವಾಹಕ ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮೊಬೈಲ್ ಕಂಪನಿಗಳ ನಿರ್ವಹಣಾಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಸ್ಥಾವರಗಳ ನಿರ್ಮಾಣಕ್ಕೆ ಸೂಕ್ತ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಜಿಲ್ಲೆಯ ಇನ್ನೂ ಕೆಲವು ಪ್ರದೇಶಗಳಲ್ಲಿ ಸ್ಥಾವರಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಿ, ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಂಸ್ಥೆಯ ಮುಖ್ಯಸ್ಥರಿಗೆ ಕಳಿಸಿದ್ದು, ಸಂಸ್ಥೆಯ ಮುಖ್ಯಸ್ಥರ ಅನುಮೋದನೆಯ ನಂತರ ಸ್ಥಾವರ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ಸಹಕಾರವನ್ನು ಕೋರಲಾಗುವುದು ಎಂದರು.

ಸಭೆಯಲ್ಲಿ ಟೆಲಿಕಾಂ ಕಂಪನಿಗಳ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

MOBILE NETWORK


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading