
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ. ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 10(1)(ಡಿ) ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಅಮಾನತು ಜಾರಿಯಾಗಿದೆ.
ಅಂಜನ್ ಕುಮಾರ್ ಅವರು 2017ರಿಂದ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದು, 2022ರ ಡಿಸೆಂಬರ್ 8ರಿಂದ 2023ರ ಜುಲೈ 18ರವರೆಗೆ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿವೆ.
ಇದಲ್ಲದೆ, ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಉನ್ನತ ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.
ಈ ಹಿಂದೆ ಸಹ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆದಿದ್ದರೂ, ವರ್ತನೆಯಲ್ಲಿ ಬದಲಾವಣೆ ಕಾಣಿಸದಿರುವುದು ಗಮನಕ್ಕೆ ಬಂದಿದೆ. ಕಾಲೇಜಿನ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತಿರುವ ಹಿನ್ನೆಲೆ ಹಾಗೂ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಚಾರಣೆ ಮುಂದುವರಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲೇಜು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಮಾನತು ಕ್ರಮ ಕೈಗೊಳ್ಳಲಾಗಿದ್ದು, ಈ ಸಂಬಂಧ ಆದೇಶವನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ್ದಾರೆ.
PRASARANANEWS..
Discover more from Prasarana news
Subscribe to get the latest posts sent to your email.
